ಕಳಪೆ ಚರಂಡಿ ಕಾಮಗಾರಿ; ವಿರೋಧ ಪಕ್ಷ ಏನು ಮಾಡುತ್ತಿದೆ?
ಅಫಜಲಪುರ: ಪಟ್ಟಣದಲ್ಲಿ ಕೈಗೊಂಡಿರುವ ಚರಂಡಿ ಕಾಮಗಾರಿ ಕಳಪೆ ಮಟ್ಟದಲ್ಲಿದ್ದು, ರಸ್ತೆ ಬದಿಯ ಚರಂಡಿ ಮುಚ್ಚಳ ಕುಸಿದು ದೊಡ್ಡ ಗುಂಡಿ ನಿರ್ಮಾಣವಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಯಾವುದೇ ಮುನ್ನೆಚ್ಚರಿಕೆ ಫಲಕ ಅಥವಾ ಸುರಕ್ಷತಾ ಕ್ರಮ ಕೈಗೊಳ್ಳದೇ ಕಾಮಗಾರಿ ನಡೆಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಚರಂಡಿಯ ಮೇಲ್ಭಾಗದ ಕಾಂಕ್ರೀಟ್ ಸಂಪೂರ್ಣವಾಗಿ ಕುಸಿದು, ಒಳಭಾಗದಲ್ಲಿರುವ ಕಬ್ಬಿಣದ ಸರಳುಗಳು ಹೊರಗೆ ಕಾಣಿಸುತ್ತಿವೆ. ರಾತ್ರಿ ವೇಳೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಪಾದಚಾರಿಗಳು ಹಾಗೂ ವಾಹನ ಸವಾರರು ಗುಂಡಿಗೆ ಬೀಳುವ ಭೀತಿ ಎದುರಿಸುತ್ತಿದ್ದಾರೆ. ಮಳೆ ಬಂದರೆ ಗುಂಡಿ ನೀರಿನಿಂದ ತುಂಬಿ ಅಪಾಯ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಶ್ರೀ ಸಿದ್ದರಾಮೇಶ್ವರ ನಾಟಕ ಸಂಘದ ಅಧ್ಯಕ್ಷ ಚಂದು ಬನ್ನಟ್ಟಿ ಆಕ್ರೋಶ ವ್ಯಕ್ತಪಡಿಸಿ, “ಪಟ್ಟಣದಲ್ಲಿ ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮೌನವಾಗಿದ್ದಾರೆ. ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗುವಂತಹ ಕಾಮಗಾರಿಯನ್ನು ಕೂಡಲೇ ಪರಿಶೀಲಿಸಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ತಾಲೂಕಿನಲ್ಲಿ ವಿರೋಧ ಪಕ್ಷದವರು ಜನರ ಸಮಸ್ಯೆಗಳ ಬಗ್ಗೆ ಏಕೆ ಧ್ವನಿ ಎತ್ತುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಕುಸಿದ ಚರಂಡಿಯನ್ನು ದುರಸ್ತಿಗೊಳಿಸಿ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸಂಭವಿಸಬಹುದಾದ ಅನಾಹುತಕ್ಕೆ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಇಲಾಖೆಯೇ ಹೊಣೆಗಾರರಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.



















