ಜಿಲ್ಲೆಗೆ ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಆಗ್ರಹ..!
ವಿಜಯಪುರ : ಜಿಲ್ಲೆಗೆ ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಆಗ್ರಹಕ್ಕೆ ಸರಕಾರ ಸ್ಪಂದಿಸದಿರುವುದನ್ನು ಖಂಡಿಸಿ ಜನವರಿ 01, 2026 ರಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರ ನಿವಾಸದ ಮುಂದೆ ಧರಣಿ ಪ್ರತಿಭಟನೆ.
ವಿಜಯಪುರ ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವ (ಪಿಪಿಪಿ ಮಾದರಿ)ಯನ್ನು ಕೈಬಿಟ್ಟು ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ಬೇಡಿಕೆಯನ್ನು ಆಗ್ರಹಿಸಿ ಸೆಪ್ಟೆಂಬರ್ 18, 2025ರಿಂದ ನಡೆಯುತ್ತಿರುವ ಅನಿರ್ಧಿಷ್ಟ ಹೋರಾಟ ಧರಣಿ ಇಂದಿಗೆ 104 ದಿನಗಳನ್ನು ಪೂರೈಸಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಸಕಲ ಮೂಲಸೌಕರ್ಯಗಳಿದ್ದರೂ ಸರಕಾರ ಈ ಬೇಡಿಕೆಗೆ ಸ್ಪಂದಿಸದಿರುವುದು ಜಿಲ್ಲೆಯ ಜನತೆಯಲ್ಲಿ ಆಕ್ರೋಶ ಮೂಡಿಸಿದೆ.ಈ ಹೋರಾಟದಲ್ಲಿ ವಿದ್ಯಾರ್ಥಿಗಳು, ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತ-ಹಿಂದುಳಿದ ವರ್ಗಗಳು, ಮಹಿಳೆಯರು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದಾರೆ. ಅಂಬೇಡ್ಕರ್ ವೃತ್ತದಲ್ಲಿ ಅನಿರ್ದಿಷ್ಟಾವಧಿ ಧರಣಿ, ರ್ಯಾಲಿ, ಮೆರವಣಿಗೆಗಳ ಮೂಲಕ ಸರಕಾರದ ಗಮನ ಸೆಳೆಯಲು ಪ್ರಯತ್ನಿಸಲಾಗಿದೆ. ಆದರೆ ಇನ್ನೂ ಲಿಖಿತ ಭರವಸೆ ಅಥವಾ ಸಕಾರಾತ್ಮಕ ನಿರ್ಧಾರ ಬಂದಿಲ್ಲ.
ಈ ಹಿನ್ನೆಲೆಯಲ್ಲಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ವತಿಯಿಂದ ಜನವರಿ 01, 2026ರಂದು ಬೆಳಿಗ್ಗೆ 10 ಗಂಟೆಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಂ.ಬಿ. ಪಾಟೀಲ್ ಅವರ ನಿವಾಸದ ಮುಂದೆ, 02 ರಂದು ಸಚಿವ ಶಿವಾನಂದ್ ಪಾಟೀಲ್ ಅವರ ನಿವಾಸದ ಮುಂದೆ ಹಾಗೂ 03 ರಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮನೆಯ ಮುಂದೆ ಧರಣಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ ಸರಕಾರಕ್ಕೆ ಮತ್ತೊಮ್ಮೆ ಒತ್ತಡ ಹೇರುವುದು ಹಾಗೂ ಜಿಲ್ಲೆಯ ಬಡ-ಹಿಂದುಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಅವಕಾಶ ಕಲ್ಪಿಸುವಂತೆ ಆಗ್ರಹಿಸಲಾಗುವುದು.
ಜಿಲ್ಲೆಯ ಎಲ್ಲ ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು, ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಈ ಧರಣಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸುತ್ತೇವೆ.
104 ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯಿಂದ ಹಮ್ಮಿಕೊಂಡ ಅನಿರ್ಧಿಷ್ಟ ಧರಣಿಯನ್ನು ಉದ್ದೇಶಿಸಿ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅನುಸೂಯ ಹಜೇರಿ, ಭಾರತಿ ವಾಲಿ, ಮಹಬೂಬಿ ಪಾಟೀಲ, ಸಾಹೇಬಿ ಶೇಖ್ ಮುಂತಾದವರು ಭಾಗವಹಿಸಿದ್ದರು. ಹೋರಾಟ ಸಮಿತಿಯ ಎಲ್ಲಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.



















