ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಲೇ ಒಳ ಮೀಸಲಾತಿ ಜಾರಿ ಮಾಡುವ ಮೂಲಕ ಬದ್ಧತೆಯನ್ನು ಪ್ರದರ್ಶಿಸಬೇಕು : ಕಾರಜೋಳ
ವಿಜಯಪುರ : ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಲೇ ಒಳ ಮೀಸಲಾತಿ ಜಾರಿ ಮಾಡುವ ದಿನಾಂಕವನ್ನು ಘೋಷಿಸುವ ಮೂಲಕ ತಮ್ಮ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಳಮೀಸಲಾತಿ ವಿಷಯವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟವಾದ ನಿಲುವುದು ವ್ಯಕ್ತಪಡಿಸಿ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸುವ ದಿನಾಂಕವನ್ನು ಘೋಷಣೆ ಮಾಡಬೇಕಾಗಿರುವುದು ಅತ್ಯಂತ ಅಗತ್ಯವಾಗಿದೆ.
ಕಾಂತರಾಜ್ ವರದಿ ಬಗ್ಗೆ ಡಾ.ಮಹಾದೇವಪ್ಪ, ಡಾ.ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ ಧ್ವಂಧ್ವ ನಿಲುವು ತಳಿದ್ದಾರೆ, ಅದನ್ನು ವಿರೋಧಿಸುತ್ತಲೂ ಇಲ್ಲ, ಸಮರ್ಥನೆ ಮಾಡುತ್ತಲೂ ಇಲ್ಲ, ನಂತರದ ದಿನಗಳಲ್ಲಿ ನ್ಯಾ. ನಾಗಮೋಹನ್ ದಾಸ್ ನೇತೃತ್ವಧ ಸರ್ವೇಕ್ಷಣೆಯ ದತ್ತಾಶಂಗಳ ಸರ್ವೇಕ್ಷಣೆ ಬಗ್ಗೆಯೂ ಈ ನಾಯಕರು ಧ್ವಂಧ್ವ ನಿಲುವು ತಾಳುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಒಳಮೀಸಲಾತಿ ಜಾರಿಗೆ ಬದ್ಧತೆ ಪ್ರದರ್ಶಿಸಬೇಕಿದೆ.
ಕಳೆದ ಆ.೧ ರಂದೇ ಸುಪ್ರೀಂಕೋರ್ಟ್ ಒಳ ಮೀಸಲಾತಿ ಜಾರಿ ಮಾಡಲು ಅಯಾ ರಾಜ್ಯಗಳಿಗೆ ಅಧಿಕಾರ ನೀಡಿದೆ. ೩೦ ವರ್ಷಗಳಿಂದ ನೆನಗುದಿಗೆ ಬಿದ್ದ ಒಳಮೀಸಲಾತಿ ಅವಶ್ಯಕತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿಜಿ ನೇತೃತ್ವದ ಸರ್ಕಾರ ಯಶಸ್ವಿಯೂ ಆಗಿದೆ. ತೆಲಂಗಾಣ, ಹರ್ಯಾಣಾ, ಆಂಧ್ರ ಪ್ರದೇಶ ಸರ್ಕಾರಗಳು ಈಗಾಗಲೇ ಒಳಮೀಸಲಾತಿ ಜಾರಿಗೊಲಿಸಿವೆ. ಆದರೆ ಸಾಮಾಜಿಕ ನ್ಯಾಯದ ಹರಿಕಾರ ಎಂದು ಬಿಂಬಿಸಿಕೊಳ್ಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಗೊಳಿಸಿಲ್ಲ, ಈ ನಡೆ ಉಳಿದ ರಾಜ್ಯಗಳ ಎದುರು ತಲೆ ತಗ್ಗಿಸುವಂತೆ ಮಾಡಿದೆ, ಇನ್ನೊಂದೆಡೆ ರಾಜ್ಯ ಸರ್ಕಾರ ಒಳಮೀಸಲಾತಿ ಹೋರಾಟವನ್ನು ದಮನಗೊಳಿಸುವ ವ್ಯವಸ್ಥಿತ ಪ್ರಯತ್ನ ಮಾಡುತ್ತಿದೆ ಎಂದು ಕಾರಜೋಳ ದೂರಿದ್ದಾರೆ.
ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸರ್ವೇಕ್ಷಣ ಕಾರ್ಯ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕಾರ್ಯವನ್ನು ಸರ್ಕಾರ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವ ದಿನಾಂಕವನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸರ್ವೇಕ್ಷಣಾ ಕಾರ್ಯಕ್ಕೆ ಆಧುನಿಕ ತಂತ್ರಜ್ಞಾನ ಬಳಕೆ ಮಾಡುತ್ತಿರುವುದರಿಂದ ಕೆಲವೇ ದಿನಗಳಲ್ಲಿ ವರದಿ ಸಿದ್ಧವಾಗುತ್ತದೆ, ಹೀಗಾಗಿ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವ ದಿನಾಂಕವನ್ನು ತ್ವರಿತಗತಿಯಲ್ಲಿ ಘೋಷಣೆ ಮಾಡುವಂತೆ ಉಮೇಶ ಕಾರಜೋಳ ಒತ್ತಾಯಿಸಿದ್ದಾರೆ.


















