ಇಂಡಿ ಮತಕ್ಷೇತ್ರದಲ್ಲಿ 4 ಸಾವಿರ ಕೋಟಿ ರೂ.ಗೂ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳಿಗೆ
ಜು.9ರಂದು ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ-ಲೋಕಾರ್ಪಣೆ
-ಶಾಸಕ ಯಶವಂತರಾಯಗೌಡ ಪಾಟೀಲ
ವಿಜಯಪುರ ಜೂ.18 : ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ ಅವರು ಜುಲೈ 9 ರಂದು ಇಂಡಿ ಪಟ್ಟಣಕ್ಕೆ ಆಗಮಿಸಿ 4 ಸಾವಿರ ಕೋಟಿ ರೂ.ಗೂ ಹೆಚ್ಚಿನ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ-ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನಿರ್ವಹಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದರು.
ಗುರುವಾರ ಇಂಡಿ ಮಿನಿ ವಿಧಾನಸೌಧದಲ್ಲಿ ಆಯೋಜಿಸಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂಡಿ ತಾಲೂಕಿನಲ್ಲಿ ಕೈಗೊಂಡಿರುವ 19 ಕೆರೆ ತುಂಬುವ ಯೋಜನೆ, ತಿಡಗುಂದಿ ಏತ ನೀರಾವರಿ ವಿಸ್ತರಣೆ, ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಕಾಮಗಾರಿ ಹಂತ-2 ಮತ್ತು 3, ತಡವಲಗಾ ಕೆಜಿಬಿವಿ ಶಾಲಾ ಕಟ್ಟಡ ನಿರ್ಮಾಣ, ಕಾರ್ಮಿಕರ ಮಕ್ಕಳಿಗಾಗಿ ವಸತಿ ಶಾಲೆ, ಮೌಲಾನಾ ಅಬುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಾಂತ್ರಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಕೊಠಡಿಗಳ ಕಾಮಗಾರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಝಳಕಿ, ಮಿರಗಿ ಗ್ರಾಮದ ಪಶು ಆಸ್ಪತ್ರೆ ಉದ್ಘಾಟನೆ, ಇಂಡಿ ತಾಲೂಕಿನ ಲಾಳಸಂಗಿ ಕೆರೆ ಸುಧಾರಣೆ, ಲೋಕೋಪಯೋಗಿ ಇಲಾಖೆ ಕಾಮಗಾರಿಗಳು, ಲಚ್ಯಾಣ ಗ್ರಾಮದ ಬಾಲಕರ ವಸತಿ ನಿಲಯ ನಿರ್ಮಾಣ, ವಿವಿಧ ಸಮುದಾಯ ಭವನಗಳ ನಿರ್ಮಾಣ, ಸಿಸಿ ರಸ್ತೆ ಕಾಮಗಾರಿ, ಮೆಘಾ ಮಾರುಕಟ್ಟೆ ಲೋಕಾರ್ಪಣೆ, ಮಿರಗಿ ಗ್ರಾಮದ ಹಳ್ಳಕ್ಕೆ ಬ್ರಿಜ್-ಕಂ-ಬ್ಯಾರೇಜ್ ನಿರ್ಮಾಣದ ಭೂಮಿ ಪೂಜೆ, ನಗರದ ತಾಲೂಕಾ ಕ್ರೀಡಾಂಗಣದ ವಿವಿಧ ಅಭಿವೃದ್ದಿ ಕಾಮಗಾರಿಗಳ ಭೂಮಿಪೂಜೆ, ಪ್ರಗತಿ ಪಥ ಯೋಜನೆ ರಸ್ತೆ ಕಾಮಗಾರಿಗೆ ಭೂಮಿಪೂಜೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಇಂಡಿ ಪಟ್ಟಣದ ಪೊಲೀಸ್ ಗ್ರೌಂಡ್ನಲ್ಲಿ ಆಯೋಜಿಸಿದ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಶ್ರಮಿಸಬೇಕು.ಸಂಬಂಧಿಸಿದ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಯೋಜನೆ-ಕಾರ್ಯಕ್ರಮಗಳ ಕುರಿತು ಪೂರ್ವ ತಯಾರಿ ಮಾಡಿಕೊಂಡು, ಕಾಮಗಾರಿಗಳ ಕುರಿತು ಸಮಗ್ರವಾದ ವರದಿ ಸಿದ್ಧಪಡಿಸಿ, ಅಧಿಕಾರಿಗಳು ಆಸಕ್ತಿಯಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಇಂಡಿ ತಾಲೂಕಿನಲ್ಲಿ ಆಯೋಜಿಸಲಾದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ,ಚಾಲನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮ ಯಶಸ್ವಿ ಆಯೋಜನೆಗೆ ಪೂರ್ವ ಸಿದ್ಧತೆ ಕೈಗೊಳ್ಳಬೇಕು. ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಶಂಕು ಸ್ಥಾಪನೆ- ಚಾಲನೆ ಹಾಗೂ ಲೋಕಾರ್ಪಣೆಗೊಳ್ಳುವ ಯೋಜನೆಗಳ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಈ ಪಟ್ಟಿಯಲ್ಲಿ ಯಾವುದಾದರೂ ವ್ಯತ್ಯಾಸಗಳಿದ್ದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೇದಿಕೆ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸೂಕ್ತ ಪೊಲೀಸ್ ರಕ್ಷಣಾ ವ್ಯವಸ್ಥೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಕೈಗೊಂಡು ಯಶಸ್ವಿ ಕಾರ್ಯಕ್ರಮಕ್ಕೆ ಎಲ್ಲರೂ ಶ್ರಮಿಸಬೇಕು. ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಹಾಗೂ 19 ಕೆರೆ ತುಂಬುವ ಯೋಜನೆಯ ಕುರಿತಾದ ಕಿರು ಸಾಕ್ಷ್ಯಚಿತ್ರ ಕಾರ್ಯಕ್ರಮದಲ್ಲಿ ಪ್ರದರ್ಶನ ಹಾಗೂ ಲಿಂಬೆ ಅಭಿವೃದ್ದಿ ಮಂಡಳಿ ಲೋಗೋ ಸಿದ್ಧಪಡಿಸಿ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಇಂಡಿ ತಹಶೀಲ್ದಾರ ವಿ.ಎಸ್.ಕಡಕಭಾವಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.