ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ
ವಿಜಯಪುರ, ಜೂ.20 : ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ನಗರದ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳಿಗ್ಗೆ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪ್ರಯಾಣಿಕರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಯಾವುದೇ ಪ್ರಯಾಣಿಕರಿಗೆ ಅನಾನೂಕೂಲವಾಗದಂತೆ ಎಚ್ಚರಿಕೆ ವಹಿಸಬೇಕು. ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಶುದ್ಧ ಕುಡಿಯುವ ನೀರು, ಸೂಕ್ತ ಶೌಚಾಲಯ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ವೀಕ್ಷಿಸಿ ಪರಿಶೀಲನೆ ನಡೆಸಿದ ಅವರು, ಕ್ಯಾಂಟೀನ್ ಮುಂಭಾಗದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ಸೇರಿದಂತೆ ರಸ್ತೆ, ವಿವಿಧ ಕಾಮಗಾರಿ ಪರಿಶೀಲನೆ ಅಗತ್ಯ ಸಲಹೆ-ಸೂಚನೆ ನೀಡಿದರು.
ನಗರದ ನವಬಾಗ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ ಅವರು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಬೇಕು. ನಗರದ ಲಲಿತ ಮಹಲ್ ಹೊಟೆಲ್ ಹತ್ತಿರದ ಕೋಟೆಗೋಡೆ ಪಕ್ಕದಲ್ಲಿ ಖಾಸಗಿ ಬಸ್ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಿದ ಅವರು, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಅನುಕೂಲಕ ಕಲ್ಪಿಸುವ ನಿಟ್ಟಿನಲ್ಲಿ ಸುಸಜ್ಜಿತ ವಾತಾವರಣ ನಿರ್ಮಾಣ, ಗ್ರಂಥಾಲಯಕ್ಕಾಗಮಿಸುವ ವಿದ್ಯಾರ್ಥಿಗಳು, ಓದುಗರಿಗೆ ಮೂಲಭೂತ ಸೌಲಭ್ಯ ಇರುವಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.