ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾದ ಸರ್ಕಾರದ ಸಾಧನೆ ಯೋಜನೆಗಳ ಮಾಹಿತಿ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಾಲನೆ
ವಿಜಯಪುರ, ಜೂ.20 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆಗಳ ಕುರಿತು ಜೂ.20ರಿಂದ 26ರವರೆಗೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಿರುವ ಮಾಹಿತಿ ವಸ್ತು ಪ್ರದರ್ಶನ ಮಳಿಗೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಚಾಲನೆ ನೀಡಿದರು.
ವಸ್ತು ಪ್ರದರ್ಶನ ಮಳಿಗೆಗಳಲ್ಲಿ ಅಳವಡಿಸಲಾದ ಸರ್ಕಾರದ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆಗಳ ಸಮಗ್ರ ಮಾಹಿತಿ, ಫಲಾನುಭವಿಗಳ ಅನಿಸಿಕೆ, ಸರ್ಕಾರವು ವಸತಿ ರಹಿತರಿಗೆ ಸೂರು ಕಲ್ಪಿಸಿದ ಮಾಹಿತಿ, ಇಂದಿರಾ ಕ್ಯಾಂಟೀನ್, ಆರೋಗ್ಯ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನೊಳಗೊಂಡ ಸಮಗ್ರ ಮಾಹಿತಿಯುಳ್ಳ ಫಲಕಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಣೆ ಮಾಡಿದರು.
ಮುಖ್ಯಮಂತ್ರಿಗಳೊಂದಿಗೆ ಜಿಲ್ಲಾಧಿಕಾರಿ ಸೆಲ್ಫಿ : ವಸ್ತು ಪ್ರದರ್ಶನದಲ್ಲಿ ನಾಡಿನ ಜನರ ಬದುಕು ಬೆಳಗಿಸಿದ ಗ್ಯಾರಂಟಿ ಯೋಜನೆಗಳ ಸಮಗ್ರ ಮಾಹಿತಿ, ಯಶೋಗಾಥೆಯನ್ನೊಳಗೊಂಡ ಪುಸ್ತಕವನ್ನು ರಾಜ್ಯದ ಮುಖ್ಯಮಂತ್ರಿಗಳಿಂದ ಪಡೆಯುವಂತೆ ಬಿಂಬಿಸುವ ಸೆಲ್ಪಿ ತೆಗೆದುಕೊಂಡು ಜಿಲ್ಲಾಧಿಕಾರಿಗಳು ಎಲ್ಲರ ಗಮನ ಸೆಳೆದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳ ಲಾಭ ಪ್ರತಿಯೊಬ್ಬ ಅರ್ಹ ಫಲಾನುವಿಗಳಿಗೆ ದೊರಕಿಸುವ ನಿಟ್ಟಿನಲ್ಲಿ, ಗ್ಯಾರಂಟಿ ಯೋಜನೆಗಳು ಒಳಗೊಂಡಂತೆ ಸರ್ಕಾರದ ಜನಪರ ಯೋಜನೆಗಳ, ಅಭಿವೃದ್ಧಿ-ಸಾಧನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿನ್ನಿಡಲು ಮಾಹಿತಿ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿರಿಸಲಾಗಿದೆ.
ಸರ್ಕಾರದ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಜಿಲ್ಲೆಯಲ್ಲಿ ಪ್ರಾರಂಭವಾದಾಗಿನಿಂದ ದಿನಾಂಕ : 18-06-2025ರವರೆಗೆ 13,54,27,837 ಮಹಿಳೆಯರು ಪ್ರಯಾಣಿಸಿದ್ದು, ಇದಕ್ಕಾಗಿ 440.34 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.
ಪ್ರತಿ ಮನೆಗೆ ಗರಿಷ್ಠ 200 ಯೂನಿಟ್ವರೆಗೆ ಉಚಿತ ವಿದ್ಯುತ್ ಸೌಕರ್ಯ ಒದಗಿಸುವ ಗೃಹಜ್ಯೋತಿ ಯೋಜನೆಯಡಿ ಈ ಯೋಜನೆ ಆರಂಭದಿಂದ ವಿಜಯಪುರ ಜಿಲ್ಲೆಯ ಫಲಾನುಭವಿಗಳು 435.43 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ ಮಾಡಿದ್ದು, 391.75 ಕೋಟಿ ರೂ. ಸರ್ಕಾರದಿಂದ ಅನುದಾನ ಇಲಾಖೆಗೆ ಲಭ್ಯವಾಗಿದೆ. ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 1882.43 ಕೋಟಿ ರೂ. ಅನುದಾನವನ್ನು ಕುಟುಂಬದ ಯಜಮಾನಿಗೆ ಖಾತೆಗೆ ಜಮೆ ಮಾಡಲಾಗಿದೆ. ಪ್ರಸಕ್ತ 2025-ರ ಫೆಬ್ರವರಿ ಹಾಗೂ ಮಾರ್ಚ್ ಮಾಹೆಯ 02 ಕಂತುಗಳ ಪಾವತಿ ಕಾರ್ಯ ಪ್ರಗತಿಯಲ್ಲಿದೆ. ವಿಜಯಪುರ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಡಿಸೆಂಬರ್ 2024ರ ವರೆಗೆ ಒಟ್ಟು 4,59,849 ಅರ್ಹ ಫಲಾನುಭವಿಗಳಿಗೆ 457.03 ಕೋಟಿ ರೂ. ಹಣವನ್ನು ಅವರ ಖಾತೆಗೆಳಿಗೆ ಡಿಬಿಟಿ ಮೂಲಕ ಜಮೆ ಮಾಡಲಾಗಿದೆ. ಯುವ ನಿಧಿ ಯೋಜನೆಯಡಿ ಜಿಲ್ಲೆಯ 15794 ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದು, 19,48,23,000 ರೂ. ಪದವಿ ಅಭ್ಯರ್ಥಿಗಳಿಗೆ ಹಾಗೂ 12,28,500 ರೂ. ಡಿಪ್ಲೋಮಾ ಅಭ್ಯರ್ಥಿಗಳಿಗೆ ಸೇರಿದಂತೆ ಒಟ್ಟು 19,60,51,500 ರೂ. ಗಳನ್ನು ಡಿಬಿಟಿ ಮೂಲಕ ಹಣವನ್ನು ಜಮೆ ಮಾಡಲಾಗಿದೆ.
ಸರ್ಕಾರ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಯೋಜನೆ-ಕಾರ್ಯಕ್ರಮಗಳ ಮಾಹಿತಿಯನ್ನು ಈ ವಸ್ತು ಪ್ರದರ್ಶನದಲ್ಲಿ ಪ್ರಚುರಪಡಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ವಸ್ತು ಪ್ರದರ್ಶನ ವೀಕ್ಷಿಸಿ, ಮಾಹಿತಿ ಪಡೆದುಕೊಂಡು ಸರ್ಕಾರದ ಯೋಜನೆಗಳ ಲಾಭ ಪಡೆಯುವಂತೆ ಅವರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆಗಳಾದ ವಾರ್ತಾ ಜನಪದ ಮಾಸಿಕ ಹಾಗೂ ವಿಜಯಪುರ ಜಿಲ್ಲೆಯ ಪಂಚನದಿಗಳ ಬೀಡಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಯಶೋಗಾಥೆ ಪುಸ್ತಕಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.
ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ,ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ, ವಾರ್ತಾಧಿಕಾರಿ ಅಮರೇಶ ದೊಡಮನಿ, ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕೆಕೆಆರ್ಟಿಸಿ ಸಹಾಯಕ ಸಂಚಾರ ವ್ಯವಸ್ಥಾಪಕ ಜೆ.ಕೆ. ಹುಗ್ಗೆನ್ನವರ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ, ಮಂಜುಳಾ ದುರಗನ್ನವರ, ಪ್ರಶಿಕ್ಷಣಾರ್ಥಿ ವಿದ್ಯಾಶ್ರೀ ಹೊಸಮನಿ, ಶಕ್ತಿ ಯೋಜನೆಯಡಿ ಫಲಾನುಭವಿಗಳಾದ ಬಬಲಾದ ಗ್ರಾಮದ ಒಡಲಧ್ವನಿ ಸದಸ್ಯರು ಸೇರಿದಂತೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.