ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ ಆಚರಣೆ : ಎಸಿ ಚಿದಾನಂದ
ಇಂಡಿ : ಜ ೨೬ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಉಪವಿಭಾಗ ಅಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದರು.
ನಗರದ ತಾಲೂಕು ಆಡಳಿತ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕು ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಆಯಾ ಸಮಿತಿಯವರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೇ ವ್ಯವಸ್ಥಿತವಾಗಿ ಆಚರಿಸಲು ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು. ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿ ಮತ್ತು ಶಾಲಾ- ಕಾಲೇಜುಗಳ ಸಿಬ್ಬಂದಿ ತಮ್ಮ ಕಾರ್ಯಾಲಯದಲ್ಲಿ ಧ್ವಜಾರೋಹಣವನ್ನು ಬೆಳಗ್ಗೆ ೭.೩೦ರೊಳಗೆ ನೆರವೇರಿಸಿ ಬೆಳಗ್ಗೆ ೮.೩೦ಕ್ಕೆ ನಗರದ ಡಾ. ಬಿ. ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಾಜರಾಗಬೇಕು.
ನಂತರ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೂ ಮುಂಚೆ ದೇಶಭಕ್ತಿಗೀತೆಗಳ ಪ್ರಸಾರ ಮಾಡಬೇಕು ಎಂದರು.
ತಹಶಿಲ್ದಾರ ಬಿ.ಎಸ್ ಕಡಕಭಾವಿ ಮಾತನಾಡಿ, ಗಣರಾಜ್ಯೋತ್ಸವ ರಾಷ್ಟ್ರೀಯ ಹಬ್ಬವಾಗಿದ್ದು, ಇದರಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಅವಕಾಶ ನೀಡಬಾರದು. ಮುಂಜಾಗ್ರತಾ ಕ್ರಮವಾಗಿ ಆಚರಣೆಯ ರೂಪುರೇಷೆಗಳ ಬಗ್ಗೆ ಅಧಿಕಾರಿಗಳು ಗಮನವಹಿಸಬೇಕು. ಗಣರಾಜ್ಯೋತ್ಸವ ವ್ಯವಸ್ಥಿತ ಆಚರಣೆಗಾಗಿ ವಿವಿಧ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಹಾಗೂ ಶ್ರದ್ಧೆಯಿಂದ ಕಾರ್ಯನಿರ್ವಹಿಸುವುದು ಮುಖ್ಯವಾಗಿದೆ ಎಂದು ಹೇಳಿದರು.
ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ ಹೊಸಮನಿ ಮಾತನಾಡಿ, ರಾಷ್ಟ್ರೀಯ ಹಬ್ಬಗಳ ಪೂರ್ವಭಾವಿ ಸಭೆ, ಶರಣರ, ಸಂತರ ಜಯಂತಿಯAತೆ ಸಾಂಪ್ರದಾಯಿಕ ಸಭೆಯಾಗಬಾರದು ಎಂದು ಮನವಿ ಮಾಡಿಕೊಳ್ಳುತ್ತೇನೆ. ಗಣರಾಜ್ಯೋತ್ಸವದ ನಿಮಿತ್ತವಾಗಿ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಸಂವಿಧಾನದ ೪ನೇ ಅಂಗವಾಗಿ ಕಾರ್ಯನಿರ್ವಹಿಸುತ್ತೀರುವ ಪತ್ರಕರ್ತರಲ್ಲಿ ಸಾಧಕ ಪತ್ರಕರ್ತರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಬೇಕು. ನಗರದ ಪ್ರಮುಖ ರಸ್ತೆಗೆ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಕ್ರೀಡಾಂಗಣದಲ್ಲಿ ಇರುವ ಶಾಲಾ-ಕಾಲೇಜು ವಿಧ್ಯಾರ್ಥಿಗಳಿಗೆ ಅಲ್ಪ-ಉಪಹಾರ ಜೊತೆಯಲ್ಲಿ ಎಲ್ಲಾ ಮೂಲ ಸೌಕರ್ಯ ಒದಗಿಸಲು ಮನವಿ ಮಾಡಿಕೊಳ್ಳುತ್ತೆನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪತಹಸೀಲ್ದಾರ ಬಸವರಾಜ ರಾವೂರ, ಸಿಪಿಐ ಪ್ರದೀಪ ಭಿಸೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಉಮೇಶ ಲಮಾಣಿ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಎಸ್.ಆರ್. ಗದ್ಯಾಳ, ಎಡಿಎಲ್ಆರ್ ಕಾಂಬಳೆ, ಸಂತೋಷ ಹೊಟಗಾರ, ಸಂತೋಷ ಕಾಳೆ, ಸದ್ದಾಂ ಮಕನದಾರ, ಕಂದಾಯ ನಿರೀಕ್ಷಕ ಗುನ್ನಾಪುರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬಸವರಾಜ ರಾವೂರ ಸ್ವಾಗತಿಸಿ, ವಂದಿಸಿದರು.
ಇಂಡಿ: ನಗರದ ತಾಲೂಕು ಆಡಳಿತ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಎಸಿ ಚಿದಾನಂದ ಗುರುಸ್ವಾಮಿ ಮಾತನಾಡಿದರು.



















