ಹಿರೇಮುರಾಳ ಸೇತುವೆ ತಡೆಗೋಡೆ ಸಂಪೂರ್ಣ ಹಾನಿ – ಅಪಘಾತ ತಡೆಗೆ ತಕ್ಷಣ ಕ್ರಮಕ್ಕೆ ಭೀಮಸೇನೆ ಒತ್ತಾಯ
ಮುದ್ದೇಬಿಹಾಳ: ಮುದ್ದೇಬಿಹಾಳದಿಂದ ನಾಲತವಾಡಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಹಿರೇಮುರಾಳ ಗ್ರಾಮದ ಸೇತುವೆ ಮೇಲಿರುವ ತಡೆಗೋಡೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಇದರಿಂದಾಗಿ ಪದೇಪದೇ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕರ್ನಾಟಕ ಭೀಮಸೇನೆ ಜಿಲ್ಲಾ ಸಮಿತಿಯ ಯುವ ಘಟಕ ಅಧ್ಯಕ್ಷರಾದ ಪರಶುರಾಮ್ ಚಲವಾದಿ ಅವರು ಪತ್ರಿಕಾ ಪ್ರಕಟಣೆ ನೀಡಿ, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಸೇತುವೆಯ ತಡೆಗೋಡೆಗಳನ್ನು ದುರಸ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. “ಈ ರಸ್ತೆ ದಿನನಿತ್ಯ ನೂರಾರು ವಾಹನ ಸಂಚಾರ ಹೊಂದಿದ್ದು, ಸೇತುವೆಯ ಎರಡೂ ಬದಿಯ ತಡೆಗೋಡೆಗಳು ಸಂಪೂರ್ಣ ಕುಸಿದು ಹೋಗಿವೆ. ಇದರಿಂದ ರಾತ್ರಿ ವೇಳೆ ಹಾಗೂ ಮಳೆಗಾಲದಲ್ಲಿ ವಾಹನ ಸವಾರರಿಗೆ ಭಾರಿ ಅಪಾಯ ಉಂಟಾಗುತ್ತಿದೆ. ಈಗಾಗಲೇ ಹಲವು ಸಣ್ಣಪುಟ್ಟ ಅಪಘಾತಗಳು ಸಂಭವಿಸಿವೆ. ದೊಡ್ಡ ಅನಾಹುತ ಸಂಭವಿಸುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು” ಎಂದು ಅವರು ತಿಳಿಸಿದ್ದಾರೆ.
ಅಲ್ಲದೆ, ಸೇತುವೆಯ ಪಕ್ಕದಲ್ಲಿ ಗಿಡಗಂಟೆಗಳು ಹೆಚ್ಚಾಗಿ ಬೆಳೆಯುತ್ತಿರುವುದರಿಂದ ವಾಹನ ಸವಾರರ ದೃಷ್ಟಿಗೆ ಅಡ್ಡಿಯಾಗುತ್ತಿದೆ. ರಸ್ತೆ ಬದಿಯ ಸ್ವಚ್ಛತೆ ಇಲ್ಲದ ಕಾರಣ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಸಂಬಂಧಪಟ್ಟ ಇಲಾಖೆ ತಕ್ಷಣವೇ ಗಿಡಗಂಟೆಗಳನ್ನು ತೆರವುಗೊಳಿಸಿ, ಸಂಪೂರ್ಣ ಸ್ವಚ್ಛತೆ ಮಾಡಿಸಿ ಸುರಕ್ಷಿತ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
“ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ, ಕರ್ನಾಟಕ ಭೀಮಸೇನೆ ಜಿಲ್ಲಾ ಸಮಿತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.
ಮುಂದೆ ಯಾವುದೇ ಅನಾಹುತ ಸಂಭವಿಸದಂತೆ ತಡೆಗಟ್ಟುವ ದೃಷ್ಟಿಯಿಂದ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.


















