ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ
ಅಫಜಲಪುರ: ಹಿಂದುಳಿದ ವರ್ಗದ ನಾಯಕ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರ ವಿಧಾನ ಪರಿಷತ್ ಸದಸ್ಯತ್ವದ ಅವಧಿ ಇದೇ ತಿಂಗಳ ಜೂನ್ 30ರಂದು ಪೂರ್ಣಗೊಳ್ಳಲಿದ್ದು, ಅವರಿಗೆ ಪೂರ್ಣಾವಧಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಬೇಕೆಂದು ಕಾಂಗ್ರೆಸ್ ಮುಖಂಡ ಅವದೂತ ಬನ್ನಟ್ಟಿ ಅವರು ಮನವಿ ಮಾಡಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019ರಲ್ಲಿ ತಿಪ್ಪಣ್ಣಪ್ಪ ಕಮಕನೂರು ಅವರು ಒಂದು ವರ್ಷದ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದು, ನಂತರ 2023ರಲ್ಲಿ ಮೂರು ವರ್ಷದ ಅವಧಿಗೆ ಸದಸ್ಯರಾಗಿ ನೇಮಕಗೊಂಡಿದ್ದರು. ಅವರ ಪ್ರಸ್ತುತ ಅವಧಿ ಇದೇ ಜೂನ್ 30ರಂದು ಅಂತ್ಯಗೊಳ್ಳಲಿದೆ ಎಂದು ತಿಳಿಸಿದರು.
ಕೋಲಿ-ಕಬ್ಬಲಿಗ (ಗಂಗಾಮತಸ್ಥ) ಸಮುದಾಯಕ್ಕೆ ಸೇರಿದ ತಿಪ್ಪಣ್ಣಪ್ಪ ಕಮಕನೂರು ಅವರು ಹಿಂದುಳಿದ ವರ್ಗಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಿರುವ ನಿಷ್ಠಾವಂತ ನಾಯಕರಾಗಿದ್ದಾರೆ.
ಜನಸಾಮಾನ್ಯರ ಸಮಸ್ಯೆಗಳನ್ನು ವಿಧಾನ ಪರಿಷತ್ತಿನಲ್ಲಿ ಸಮರ್ಥವಾಗಿ ಪ್ರಸ್ತಾಪಿಸಿ, ಅವುಗಳ ಪರಿಹಾರಕ್ಕಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ ಎಂದು ಅವರು ಹೇಳಿದರು.
ಹಿಂದುಳಿದ ವರ್ಗಗಳ ಮತಗಳ ಕ್ರೋಢೀಕರಣದಲ್ಲಿಯೂ ಅವರು ಪ್ರಮುಖ ಪಾತ್ರ ವಹಿಸಿದ್ದು, ಸಮಾಜದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಆದ್ದರಿಂದ ಅವರ ಸೇವೆಯನ್ನು ಪರಿಗಣಿಸಿ ಮತ್ತೊಮ್ಮೆ ಪೂರ್ಣಾವಧಿಗೆ ರಾಜ್ಯ ವಿಧಾನ ಪರಿಷತ್ ಸದಸ್ಯರನ್ನಾಗಿ ಮರು ನೇಮಕ ಮಾಡಬೇಕೆಂದು ಅವದೂತ ಬನ್ನಟ್ಟಿ ಅವರು ಕೆ.ಸಿ.ಸಿ.ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ರಾಜ್ಯದ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ.ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕಲ್ಬುರ್ಗಿ ಉಸ್ತುವಾರಿ ಸಚಿವ ಪ್ರೀಯಾಂಕ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ.


















