ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ
ಇಂಡಿ: ವಿಜಯಪುರ ಜಿಲ್ಲೆಯನ್ನು ಸಂವಿಧಾನದ 371(ಜೆ) ವಿಧಿಯ ಮೀಸಲಾತಿಗೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಕಳುಹಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ಮುಖಂಡರು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಸಂವಿಧಾನದ 371(ಜೆ) ವಿಧಿಗೆ ತಿದ್ದುಪಡಿ ತಂದು ವಿಜಯಪುರ ಜಿಲ್ಲೆಯನ್ನು ಮೀಸಲಾತಿ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ಕುರಿತು ಮುಖ್ಯಮಂತ್ರಿ ಅವರ ಮನವೊಲಿಸಿ, ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಬೇಕು ಎಂದು ಹೋರಾಟ ಸಮಿತಿ ಮುಖಂಡರು ಒತ್ತಾಯಿಸಿದರು. ಜಿಲ್ಲೆ 371(ಜೆ) ವ್ಯಾಪ್ತಿಗೆ ಸೇರ್ಪಡೆಯಾಗುವವರೆಗೆ ತಾತ್ಕಾಲಿಕವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸೌಲಭ್ಯಗಳನ್ನು ವಿಜಯಪುರ ಜಿಲ್ಲೆಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಹೋರಾಟ ಸಮಿತಿಯ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ವಿಜಯಪುರ ಜಿಲ್ಲೆಯ ಸುಮಾರು 25 ಲಕ್ಷ ಜನರ, ವಿಶೇಷವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯ, ಯುವಕರಿಗೆ ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ದೊರೆಯುವ ವಿಶೇಷ ಅನುದಾನ ಮತ್ತು ಅಭಿವೃದ್ಧಿ ಸೌಲಭ್ಯಗಳ ದೃಷ್ಟಿಯಿಂದ 371(ಜೆ) ತಿದ್ದುಪಡಿ ಅತ್ಯಗತ್ಯವಾಗಿದೆ. ಜಿಲ್ಲೆಯ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಕೇಂದ್ರಕ್ಕೆ ತಿದ್ದುಪಡಿ ಪ್ರಸ್ತಾವನೆ ಕಳುಹಿಸಿ ನ್ಯಾಯ ಒದಗಿಸಬೇಕು ಎಂದು ಹೋರಾಟ ಸಮಿತಿ ಮುಖಂಡರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹೋರಾಟಗಾರರಾದ ವಿನೋದ ಖೇಡ, ಲಾಯಪ್ಪ ಇಂಗಳೆ, ಚಂದ್ರಶೇಖರ ಹೊಸಮನಿ, ಮಲ್ಲನಗೌಡ ಬಿರಾದಾರ (ಬರಟಗಿ), ಸಂಜೀವ ಪಾಟೀಲ (ಕಣ್ಣೂರು) ಸೇರಿದಂತೆ ಹಲವರು ಉಪಸ್ಥಿತರಿದ್ದರು.

















