ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು
ವಿಜಯಪುರ :ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾವಲು ಸಮಿತಿ ಸಭೆ ನಡೆಸಿ, ಸಭೆಯ ಮಾಹಿತಿಯನ್ನು ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು ನಿಗಾ ವಹಿಸಬೇಕು.
ಬಾಲ್ಯ ವಿವಾಹ ಕಾನೂನಿನ್ವಯ ಅಪರಾಧವಾಗಿದ್ದು, ಈ ಕುರಿತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾವಲು ಸಮಿತಿ ಕ್ರೀಯಾಶೀಲವಾಗಿ ಕಾರ್ಯನಿರ್ವಹಿಸಿ ಗ್ರಾಮ ಮಟ್ಟದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಸೂಚಿಸಿದ ಅವರು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ನಡೆಸದಿದ್ದಲ್ಲಿ ಸಂಬಂಧಿಸಿದ ಮೇಲೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಮಕ್ಕಳ ಬಾಲ್ಯ ಸುಂದರವಾಗಿಸುವ ನಿಟ್ಟಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಮಕ್ಕಳ ಪಾಲಕರು-ಪೋಷಕರು ಸೇರಿದಂತೆ ಸಾರ್ವಜನಿಕರಿಗೆ ಸೂಕ್ತ ಅರಿವು ಮೂಡಿಸಬೇಕು. ಬಾಲ್ಯವಿವಾಹಕ್ಕೆ ಪ್ರೋತ್ಸಾಹಿಸುವವರಿಗೆ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಅವರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ಅವರು ಹೇಳಿದರು. ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಭೆ ನಡೆಸಿರುವ ಕುರಿತು ಮಾಹಿತಿ ಕ್ರೋಡಿಕರಿಸಬೇಕು. ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳು ಕಣ್ಣು ಮತ್ತು ಕಿವಿ ಇದ್ದಂತೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು, ಸ್ಥಳೀಯ ಆಡಳಿತ ಕ್ರೀಯಾಶಿಲತೆಯೊಂದಿಗೆ ಕಾರ್ಯನಿರ್ವಹಿಸಿ, ಬಾಲ್ಯ ವಿವಾಹ ತಡೆಗೆ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ಜಿಲ್ಲೆಯ ವಿವಿಧ ಬಸ್ ನಿಲ್ದಾಣ, ಸ್ವಚ್ಛವಾಹಿನಿಗಳಲ್ಲಿ ಜಿಂಗಲ್ಸ್ ಮೂಲಕ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹ ಇದೊಂದು ಸಾಮಾಜಿಕ ಪಿಡುಗು. ಇದನ್ನು ತೊಡೆದು ಹಾಕಲು ಸಂಬಂಧಿಸಿದ ಇಲಾಖೆಗಳು ಗಮನ ಹರಿಸಿ, ಹೆಚ್ಚೆಚ್ಚು ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರ್ಗೆ ಅವಶ್ಯಕವಿರುವ ಮೂಲ ಸೌಲಭ್ಯಗಳನ್ನು ಕಲ್ಪಿಸಿ, ದಿನದ 24 ಗಂಟೆ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ 2005 ನಿಯಮ 2006 ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಕೌಟುಂಬಿಕ ಹಿಂಸೆಗೊಳಗಾಗಿ ಸಾಂತ್ವನ ಕೇಂದ್ರ ಹಾಗೂ ಸಖಿ ಒನ್ ಕೇಂದ್ರಗಳಲ್ಲಿ ಕೌನ್ಸಿಲಿಂಗ್ ಪಡೆದವರ ಮನೆಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಭೇಟಿ ನೀಡಿ, ಅವರ ಸಮಸ್ಯೆಗಳನ್ನು ಆಲಿಸುವಂತೆ ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಶಾಲೆಗೆ ತೆರಳುವ ಬಾಲಮಂದಿರದ ಮಕ್ಕಳ ಸುರಕ್ಷತೆಗೆ ತೀವ್ರ ಗಮನ ಹರಿಸಬೇಕು. ಕಡ್ಡಾಯವಾಗಿ ಮಕ್ಕಳ ಹಾಜರಾತಿ ನಿರ್ವಹಣೆ ಮಾಡಬೇಕು. ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕಾಲಕಾಲಕ್ಕೆ ಮಕ್ಕಳ ಕಲ್ಯಾಣ ಸಮಿತಿ ಸಭೆ ನಡೆಸಿ, ಮಕ್ಕಳ ಕುಂದು-ಕೊರತೆ ಆಲಿಸಬೇಕು. ಜಿಲ್ಲೆಯಲ್ಲಿ ಬಾಲಕಾರ್ಮಿಕ ಮಕ್ಕಳು ಇರದಂತೆ ನೋಡಿಕೊಳ್ಳಬೇಕು ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರದಯದರ್ಶಿಗಳೂ ಆದ. ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಹಾಗರಗಿ, ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತ್ರದ, ಡಿವೈಎಸ್ಪಿ ಬಸವರಾಜ ಯಲಿಗಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ದೀಪಾ ಕಾಳೆ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೀಪಾಕ್ಷಿ ಜಾನಕಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು


















