ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ : ನಮ್ಮ ಆರೋಗ್ಯಕ್ಕೆ ನಾವು ಮೊದಲ ಪ್ರಾಮುಖ್ಯ ನೀಡಬೇಕಿದೆ. ಉತ್ತಮ ಆರೋಗ್ಯಕ್ಕೆ ಉತ್ತಮ ವಾತಾವರಣ ನಿರ್ಮಾಣ ಅಗತ್ಯವಿದ್ದು ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಆರೋಗ್ಯ ನೀರಿಕ್ಷಣಾಧಿಕಾರಿ ಎಂ ಎಸ್ ಗೌಡರ ಹೇಳಿದರು.
ಪಟ್ಟಣದ ಹುಡ್ಕೋ ಕಾಲೋನಿಯ ಮಾರುತಿ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಮುದ್ದೇಬಿಹಾಳ ಅವರು ಹಮ್ಮಿಕೊಂಡ ಆರೋಗ್ಯ ಕುರಿತು ಮಾಹಿತಿ ನೀಡುವ ಜ್ಞಾನ ವಿಕಾಸ ಸಂಘದ ಸದಸ್ಯರ ಸಭೆಯಲ್ಲಿ ಮಾತನಾಡಿ ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ.ಮಳೆಗಾಲ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣ ಮಾಡುವುದು ಬಹಳ ಮುಖ್ಯವಾಗಿರುತ್ತದೆ ಕಾರಣ ಮನೆಯಲ್ಲಿರುವ ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು ಪುನ: ನೀರು ತುಂಬಿಸುವುದು ಮತ್ತು ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಮನೆಯ ಸುತ್ತ ಮುತ್ತ ಬೀಸಾಡಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು ಡೆಂಗ್ಯೂ ಹರಡುವುದನ್ನು ನಿಯಂತ್ರಿಸುವುದು ಎಲ್ಲರ ಜವಾಬ್ದಾರಿಯಾಗಿದೆ “ಆರೋಗ್ಯ ಇಲಾಖೆಯಿಂದ ಲಾರ್ವಾ ಸಮೀಕ್ಷೆಯನ್ನು ನಡೆಸುವುದರ ಜೊತೆಗೆ ಜನರಿಗೆ ಆರೋಗ್ಯ ಶಿಕ್ಷಣ ನೀಡುತ್ತಿದೆ ಮಳೆಗಾಲದಲ್ಲಿ ಸೋಂಕು ಹೆಚ್ಚಾಗಿ ಹರಡುವುದರಿಂದ ಇವುಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ಸಾರ್ವಜನಿಕರು ನೋಡಿಕೊಳ್ಳಬೇಕು. ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಬೇಕು. ನೀರು ಶೇಖರಣಾ ತೊಟ್ಟಿ, ಟ್ಯಾಂಕ್ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಬೇಕು. ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬಾರದು. ಮನೆಯ ಸುತ್ತಲು ಹಾಗೂ ತಾರಸಿ ಮೇಲೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕೆಂದು ಧರ್ಮಸ್ಥಳ ಮಹಿಳಾ ಸಂಘದ ಸದಸ್ಯರಿಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾನಗರದ ಪುರಸಭೆ ಸದಸ್ಯರಾದ ಸಹನಾ ಬಡಿಗೇರ್ ಹಾಗೂ ಶ್ರೀ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮನ್ವಯ ಅಧಿಕಾರಿ ಸುಜಾತಾ ನಾಯಕ ಸೇವಾ ಪ್ರತಿನಿಧಿ ವಿಜಯಲಕ್ಷ್ಮಿ ಮೋಟಗಿ ಹಾಗೂ ಸಂಘದ ಪದಾಧಿಕಾರಿಗಳು ಸದಸ್ಯರು,ಸೇರಿದಂತೆ ಉಪಸ್ಥಿತರಿದ್ದರು.