ಕೆರೆ ತುಂಬಿಸಲು ಆಗ್ರಹಿಸಿ ಅಧಿಕಾರಿಗಳಿಗೆ ರೈತರ ಮನವಿ: ಏಳು ದಿನಗಳ ಗಡುವು..!
ಮುದ್ದೇಬಿಹಾಳ: ತಾಲ್ಲೂಕಿನಲ್ಲಿ ಬೇಸಿಗೆಯ ಬಿರುಬಿಸಿಲು ತೀವ್ರಗೊಂಡಿದ್ದು, ಹನಿ ನೀರಿಗೂ ಹಾಹಾಕಾರ ಶುರುವಾಗಿದೆ. ಈ ಕೂಡಲೇ ತಾಲ್ಲೂಕಿನ ಎಲ್ಲ ಕೆರೆಗಳಿಗೆ ಆಲಮಟ್ಟಿ ಜಲಾಶಯದಿಂದ ನೀರು ತುಂಬಿಸಬೇಕು ಎಂದು ಆಗ್ರಹಿಸಿ ರೈತ ಮುಖಂಡ ರಾಜುಗೌಡ ಕರಡ್ಡಿ ಅವರ ನೇತೃತ್ವದಲ್ಲಿ ಶನಿವಾರ ತಹಶೀಲ್ದಾರ್ ಮುಖಾಂತರ ಕೆಬಿಜೆಎನ್ಎಲ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿ ಮಾತನಾಡಿದ ಕರಡ್ಡಿ ಅವರು, ಪಕ್ಕದ ತಾಲ್ಲೂಕುಗಳ ಕೆರೆಗಳನ್ನು ತುಂಬಿಸಲಾಗಿದ್ದರೂ ಮುದ್ದೇಬಿಹಾಳ ತಾಲ್ಲೂಕಿನ ಕೆರೆಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ಅಧಿಕಾರಿಗಳು ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಕುಡಿಯುವ ನೀರಿಗಾಗಿ ಜನ-ಜಾನುವಾರುಗಳು ಪರಿತಪಿಸಬೇಕಾಗುತ್ತದೆ. ಮುಖ್ಯವಾಗಿ ಇಂಗಳಗೇರಿ ಕೆರೆಯನ್ನು ಮೊದಲ ಆದ್ಯತೆಯ ಮೇಲೆ ತುಂಬಿಸಬೇಕು ಎಂದು ಒತ್ತಾಯಿಸಿದರು.
ಒಂದು ವೇಳೆ ಇನ್ನು ಏಳು ದಿನಗಳ ಒಳಗಾಗಿ ನಮ್ಮ ಬೇಡಿಕೆ ಈಡೇರದಿದ್ದಲ್ಲಿ ಇಂಗಳಗೇರಿ ಹಾಗೂ ಗುಡ್ನಾಳ ಗ್ರಾಮಸ್ಥರೊಂದಿಗೆ ಸೇರಿ ಕೆಬಿಜೆಎನ್ಎಲ್ ಕಚೇರಿಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಬಸವರಾಜ ಕುಂಟೋಜಿ, ಸಿದ್ದು ಕಡ್ಡಿ, ಆದಪ್ಪಗೌಡ ಗಬಸಾವಳಗಿ, ಶಿವಣ್ಣ ದೊರನಳ್ಳಿ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.


















