ಓದಿನೊಂದಿಗೆ ಪಠ್ಯೇತರ ಚಟುವಟಿಕೆಗೆ ಪ್ರಾಮುಖ್ಯತೆ ನೀಡಿ
-ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಲಹೆ
ವಿಜಯಪುರ, ಆಗಸ್ಟ್ 29 : ವಿದ್ಯಾರ್ಥಿಗಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಿ ಸುಂದರ ಭದ್ರ ಭವಿಷ್ಯಕ್ಕೆ ಬುನಾದಿ ಹಾಕಿಕೊಳ್ಳುವ ಮೂಲಕ ಜೀವನದ ಪ್ರಮುಖ ಘಟ್ಟವಾದ ವಿದ್ಯಾರ್ಥಿ ಜೀವನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.
ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ 29ರ ಗುರುವಾರದಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ತಿಕೋಟ ತಾಲೂಕಿನ ಅರಕೇರಿಯಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಅಂತರ್ ಶಾಲಾ ಹಾಗೂ ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನೆರಳು ನಮ್ಮನ್ನು ಹಿಂಬಾಲಿಸಿದಂತೆ ನಮ್ಮ ಸಾಧನೆಗಳು ನಮ್ಮನ್ನು ಹಿಂಬಾಲಿಸುತ್ತವೆ. ಮೇಜರ್ ದ್ಯಾನ ಚಂದ ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಅವರು ಹಾಕಿಯಲ್ಲಿ ತಮ್ಮದೆಯಾದ ಛಾಪು ಮೂಡಿಸಿ, ಹಾಕಿ ಮಾಂತ್ರಿಕರಾಗಿದ್ದು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅವರ ಸಾಧನೆ ಅವಲೋಕಿಸಿ, ಅವರ ಸತತ ಶ್ರಮ ಕಠಿಣ ಅಭ್ಯಾಸಗಳಿಂದ ಮಾಡಿರುವ ಅವರ ಸಾಧನೆಯನ್ನು ವಿದ್ಯಾರ್ಥಿಗಳು ಪ್ರೆರೆಣೆಯಾಗಿ ಪಡೆದು, ಸಾಧನೆ ಪಥದಲ್ಲಿ ಸಾಗಿ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದು ಅವರು ಆಶಿಸಿದರು.
ಈ ವಸತಿ ಶಾಲೆ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿದ್ದು, ಅವರ ಜೀವನ ಚರಿತ್ರೆ ಅಧ್ಯಯನ ಮಾಡುವ ಮೂಲಕ ಅವರ ಸಾಧನೆಗಳನ್ನು ತಿಳಿದುಕೊಳ್ಳಬೇಕು. ಸಾಧಕರು ನಮಗೆ ಯಾವಾಗಲೂ ಪ್ರೇರಣಾದಾಯಕರಾಗಿರುತ್ತಾರೆ. ತಮ್ಮ ಶಾಲಾ ಜೀವನದ ಸಂದರ್ಭ ನೆನಪಿಸಿಕೊಂಡ ಜಿಲ್ಲಾಧಿಕಾರಿಗಳು ಇಂತಹ ಮಹಾನ್ ವ್ಯಕ್ತಿಗಳನ್ನು ಎರಡು ಬಾರಿ ಭೇಟಿಯಾಗಲು ದೊರೆತ ಅವಕಾಶಕ್ಕೆ ಹೆಮ್ಮೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೈಯ್ಯಲು ಹಲವು ಅವಕಾಶ ಒದಗಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಉತ್ತಮ ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಜಯಪುರ ಐ.ಆರ್.ಬಿ ಕಮಾಂಡೆಂಟ್ ನಂದಕುಮಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಅರಕೇರಿಯ ಡಾ:ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಪ್ರಾಂಶುಪಾಲರಾದ ಶ್ರೀಮತಿ ರೇಖಾ ಬಾರ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.