ಕರ್ನಾಟಕ ಸಂಭ್ರಮ-50
ಸೆ.30 ರಂದು ಗುಡ್ಡಾಪುರದಲ್ಲಿ ನಡೆಯುವ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ಸುಸೂತ್ರವಾಗಿ ಕಾರ್ಯಕ್ರಮಕ್ಕಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ- ಜಿಲ್ಲಾಧಿಕಾರಿ ಟಿ.ಭೂಬಾಲನ್
ವಿಜಯಪುರ, ಸೆ.26 :ಕರ್ನಾಟಕ ಸಂಭ್ರಮ-50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದ ಶ್ರೀ ದಾನಮ್ಮದೇವಿ ದೇವಸ್ಥಾನದ ಸುಕ್ಷೇತ್ರದಲ್ಲಿ ಸೆಪ್ಟೆಂಬರ್ 30 ರಂದು ನಡೆಯುವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಯನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಗುಡ್ಡಾಪುರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಸೇರಿದಂತೆ ಸಚಿವರು, ಗಣ್ಯಾತಿಗಣ್ಯರು ಆಗಮಿಸುವರು. ಶಿಷ್ಟಾಚಾರದ ಅನ್ವಯ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕ ಗಡಿನಾಡ ಹಿರಿಯ ಚೇತನಗಳಾದ ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದೇವರು, ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೂ ನಡೆಯುತ್ತಿದ್ದು, ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜಿಸುವ ದೃಷ್ಟಿಯಿಂದ ಈಗಾಗಲೇ ಜಿಲ್ಲಾಡಳಿತದಿಂದ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಹಲವು ಸಮಿತಿಗಳನ್ನು ರಚಿಸಿ, ಅಧಿಕಾರಿಗಳನ್ನು ನೇಮಿಸಿ, ಜವಾಬ್ದಾರಿ ವಹಿಸಲಾಗಿದೆ. ಈಗಾಗಲೇ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಪೂರ್ವಭಾವಿ ಸಭೆಯಲ್ಲಿ ಸೂಚನೆ ನೀಡಿ,ವಹಿಸಿದ ಕಾರ್ಯಗಳನ್ನು ಯಾವುದೇ ಸಮಸ್ಯೆಬಾರದಂತೆ ನಿರ್ವಹಿಸುವಂತೆ ಸೂಚಿಸಿದರು.
ಈ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಡೆಯುವ ದೃಷ್ಟಿಯಿಂದ ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.
ಕರ್ನಾಟಕ ಸುವರ್ಣ ಸಂಭ್ರಮದ ಈ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರೂ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರು ಆಗಮಿಸುತ್ತಿದ್ದು,ಯಾವುದೇ ಸಮಸ್ಯೆಯಾಗದಂತೆ ವಸತಿ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.
ಕಾರ್ಯಕ್ರಮದ ಯಶಸ್ಸಿಗಾಗಿ ಸ್ವಾಗತ, ಮೆರವಣಿಗೆ, ವೇದಿಕೆ ನಿರ್ವಹಣೆ ಮತ್ತು ನಿರ್ಮಾಣ, ಸಾಂಸ್ಕೃತಿಕ ಕಾರ್ಯಕ್ರಮ, ಸಾರಿಗೆ, ವಸತಿ, ಪ್ರಚಾರ, ಆರೋಗ್ಯ, ಸ್ವಚ್ಚತಾ, ಭದ್ರತೆ ಹಾಗೂ ಊಟೋಪಚಾರ ಸಮಿತಿಗಳನ್ನು ರಚಿಸಲಾಗಿದೆ. ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿರುವುದರಿಂದ, ಕುಡಿಯುವ ನೀರು ಸೇರಿದಂತೆ ಅಗತ್ಯ ವ್ಯವಸ್ಥೆಗೆ ಸೂಚಿಸಿದರು.ಕಾರ್ಯಕ್ರಮದ ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಮಾತಾನಾಡಿ,ಭದ್ರತಾ ವ್ಯವಸ್ಥೆಗೆ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶ್ರೀ ದಾನಮ್ಮದೇವಿ ಟ್ರಸ್ಟಿನ ಅಧ್ಯಕ್ಷರಾದ ವಿಜುಗೌಡ ಪಾಟೀಲ,ಕಾರ್ಯದರ್ಶಿ ವಿಠ್ಠಲ್ ಪೂಜಾರ,ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ,ಪಿಆರ್ ಡಿ ಕಾರ್ಯನಿರ್ವಾಹಕ ಅಭಿಯಂತರರಾದ ನಬಿಲಾಲ ಗಬಸಾವಳಗಿ,ಗ್ರಾಮೀಣ ಕುಡಿಯವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಬಸವರಾಜ ಕುಂಬಾರ,ನಿರ್ಮಿತಿ ಕೇಂದ್ರದ ಮಲಜಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಸಿ.ಬಿ.ಚಿಕ್ಕಲಗಿ,ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ,ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ,ವಾರ್ತಾಧಿಕಾರಿ ಅಮರೇಶ ದೊಡಮನಿ,
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.