ಮುದ್ದೇಬಿಹಾಳ: ನಿಂತ ನೀರಿನಲ್ಲಿ ಮುಳುಗಿ ಕುರಿಗಾಯಿ ಬಾಲಕ ಸಾವು
ಮುದ್ದೇಬಿಹಾಳ: ಪಟ್ಟಣದ ಕುಂಟೋಜಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ನಿಂತಿದ್ದ ನೀರಿನಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಮೃತ ಬಾಲಕನನ್ನು ಸುದೀಪ ಗಂಗನಹಳ್ಳಿ (15) ಎಂದು ಗುರುತಿಸಲಾಗಿದೆ. ಈತ ಜಮೀನಿನ ಬಳಿ ಕುರಿ ಕಾಯಲು ಬಂದಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಆದರೆ, ಬಾಲಕ ಆಕಸ್ಮಿಕವಾಗಿ ನೀರಿಗೆ ಬಿದ್ದನೇ ಅಥವಾ ಸಾವಿನ ಹಿಂದೆ ಬೇರೇನಾದರೂ ಕಾರಣವಿದೆಯೇ ಎಂಬುದು ಸದ್ಯಕ್ಕೆ ನಿಗೂಢವಾಗಿದ್ದು, ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ
ಬಾಲಕ ನೀರಿಗೆ ಬಿದ್ದಿರುವ ವಿಷಯ ತಿಳಿದ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ, ನೀರಿನಲ್ಲಿ ಮುಳುಗಿದ್ದ ಬಾಲಕನ ಶವವನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು.
ಸ್ಥಳಕ್ಕೆ ಪೊಲೀಸರ ಭೇಟಿ
ವಿಷಯ ತಿಳಿಯುತ್ತಿದ್ದಂತೆ ಮುದ್ದೇಬಿಹಾಳ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಕಣ್ಣೀರು ಹಾಕಿದ ಕುಟುಂಬಸ್ಥರು
ಬಾಲಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಕುರಿ ಕಾಯಲು ಹೋದ ಮಗ ಹೆಣವಾಗಿ ಮರಳಿದ್ದನ್ನು ಕಂಡು ಪೋಷಕರ ರೋದನೆ ನೆರೆದಿದ್ದವರ ಕಣ್ಣಾಲಿಗಳನ್ನು ತೇವಗೊಳಿಸಿದರು