ಅಫಜಲಪುರ: ನಮ್ಮ ದೇಶದಲ್ಲಿ ವಿವಿಧ ಧರ್ಮ, ಆಚರಣೆಗಳನ್ನು ಕಾಣಬಹುದು. ಹಬ್ಬ ಹರಿದಿನಗಳ ಆಚರಣೆಯಿಂದ ಮನಸ್ಸಿನ ದುಗುಡ ದೂರವಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದು ಡಾ. ಅಭಿನವ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು ಹೇಳಿದರು.
ಅವರು ತಾಲೂಕಿನ ಅಂಕಲಗಾ ಗ್ರಾಮದ ಮಲ್ಲಿಕಾರ್ಜುನ ದೇವರ ಜಾತ್ರೆಯ ಪ್ರಯುಕ್ತ ನಡೆದ ಅಡ್ಡ ಪಲ್ಲಕ್ಕಿ ಮಹೋತ್ಸವದ ಬಳಿಕ ನಡೆದ ಧರ್ಮ ಸಭೆಯಲ್ಲಿ ಸಾನಿಧ್ಯ ವಹಿಸಿ ಮಾತನಾಡುತ್ತಾ ಭಕ್ತರ ಭಕ್ತಿಗೆ ಬೆಲೆ ಕಟ್ಟಲಾಗುವುದಿಲ್ಲ. ಅಂಕಲಗಿ ಗ್ರಾಮದ ಭಕ್ತರ ವರ್ಷದಿಂದ ವರ್ಷಕ್ಕೆ ಜಾತ್ರೆಯನ್ನು ವೈಭವದಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅವರ ಭಕ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ.
ಮಕ್ಕಳು ಮೊಬೈಲ್ ಗೀಳಿನಿಂದ ಬದುಕು ಮತ್ತು ಬಾಲ್ಯದ ಆಟ ಪಾಠಗಳಿಂದ ವಂಚಿತವಾಗುತ್ತಿದ್ದಾರೆ. ಹೀಗಾಗಿ ಪಾಲಕರು ಮಕ್ಕಳ ಮೇಲೆ ನೀಗಾ ಇಡಿ. ಅಲ್ಲದೆ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತಿಳಿಸಿ ಎಂದು ಸಲಹೆ ನೀಡಿದರು.
ಐನಾಪುರ ಮಠದ ಪಂಚಾಕ್ಷರಿ ದೇವರು ಮಾತನಾಡುತ್ತಾ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಗಳ ಜೊತೆಗೆ ಅನ್ನ ದಾಸೋಹ, ಅಕ್ಷರ ದಾಸೋಹಗಳ ಮೂಲಕ ತ್ರಿವಿಧ ದಾಸೋಹಿಯಾಗಿ ಮನೆ ಮಾತಾಗಿರುವವರು ಬಡದಾಳದ ಚನ್ನಮಲ್ಲ ಶಿವಯೋಗಿಗಳು, ಅವರ ತ್ರಿವಿಧ ದಾಸೋಹದ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು. ನಾವು ಅವರಿಂದ ಪ್ರೇರಣೆಗೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಬಿ. ವಾಯ್ ಪಾಟೀಲ್, ದಳಪತಿ ಪಡಶೆಟ್ಟಿ, ಅಣ್ಣಾರಾಯ ಸಾಹುಕಾರ, ಸಾಹೇಬಗೌಡ ಮುಲಗೆ, ತೇಜಿರಾಯ ಮುಲಗೆ, ಬಸಣ್ಣ ಕುಂಬಾರ ಸೇರಿದಂತೆ ಅನೇಕರು ಇದ್ದರು.
ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಬುರಗಿ.