ಮುದ್ದೇಬಿಹಾಳ:ಪಶು ಆಸ್ಪತ್ರೆ ಮುದ್ದೇಬಿಹಾಳ ಆವರಣದಲ್ಲಿ ಪುರಸಭೆ ಅಧ್ಯಕ್ಷ ಮೈಹಿಬೂಬ ಗೊಳಸಂಗಿಯವರು ಕಾಲುಬಾಯಿ ಬೇನೆ ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ ಎಲ್ಲ ರೈತರುಗಳು ತಮ್ಮ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಿಕೊಳ್ಳಬೇಕೆಂದು ಕರೆ ನೀಡಿದರು.
ಮುದ್ದೇಬಿಹಾಳ ತಾಲೂಕಿನಲ್ಲಿರುವ ಎಲ್ಲ ಜಾನುವಾರುಗಳಿಗೆ ಏಪ್ರಿಲ್ 26 ರಿಂದ ಜೂನ್ 9 ರವರೆಗೆ 7ನೇ ಸುತ್ತಿನ ಜಾನುವಾರುಗಳ ಕಾಲುಬಾಯಿ ಬೇನೆ ರೋಗದ ವಿರುದ್ದ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಹಸಿಲ್ದಾರ್ ಬಲರಾಮ ಕಟ್ಟಿಮನಿ ಅವರು ತಿಳಿಸಿದರು.
ತಹಸೀಲ್ದಾರ್ ಕಚೇರಿಯಲ್ಲಿ ಎಪ್ರಿಲ್ 25 ರಂದು ಜರುಗಿದ 7ನೇ ಸುತ್ತಿನ ಜಾನುವಾರುಗಳ ಕಾಲುಬಾಯಿ ಬೇನೆ ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮದ ತಾಲೂಕು ಮಟ್ಟದ ನಿರ್ವಹಣಾ ಸಮಿತಿಯ ಪೂರ್ವಭಾವಿ ಸಿದ್ಧತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾಲುಬಾಯಿ ಬೇನೆ ರೋಗದ ಲಸಿಕಾ ಕಾರ್ಯಕ್ರಮದ ಜೊತೆಗೆ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕೆ ಹಾಗೂ ನಾಯಿಗಳಿಗೆ ರೇಬಿಸ್ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ರೈತರುಗಳು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶಿವಾನಂದ ಮೇಟಿ ಲಸಿಕಾ ಕಾರ್ಯಕ್ರಮದ ಸಿದ್ಧತೆ ಕುರಿತು ಮಾಹಿತಿ ನೀಡಿದರು.. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪ್ರತಿ ಆರು ತಿಂಗಳಿಗೊಮ್ಮೆ ಜಾನುವಾರುಗಳಿಗೆ ಕಾಲುಬಾಯಿ ಬೇನೆ ರೋಗದ ವಿರುದ್ಧ ಲಸಿಕೆ ಹಾಕಿಸಿಕೊಳ್ಳುವುದು ಉತ್ತಮ ಯೋಜನೆಯಾಗಿದೆ. ಜಾನುವಾರುಗಳಿಗೆ ಈ ರೋಗ ತಗಲಿದರೆ ರೈತರುಗಳು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಾರೆ. ಸದರಿ ರೋಗದ ವಿರುದ್ಧ ಲಸಿಕೆ ಹಾಕಿಸಿಕೊಂಡು ನಮ್ಮ ತಾಲೂಕು, ಜಿಲ್ಲೆ ಹಾಗೂ ರಾಜ್ಯವನ್ನು ರೋಗಮುಕ್ತವನ್ನಾಗಿ ಮಾಡಲು ಇದು ಉತ್ತಮ ಮಾರ್ಗ ಎಂದು ತಿಳಿಸಿದರು.
ತಾಲೂಕಿನಲ್ಲಿ ವಾಸ್ತವವಾಗಿ ಒಟ್ಟು ಸುಮಾರು 21500 ಜಾನುವಾರುಗಳು ಇರುತ್ತವೆ. ಇಲಾಖೆಯ ಹಾಗೂ ಇಲಾಖೇತರ ಒಟ್ಟು 30 ಸಿಬ್ಬಂದಿಗಳು ಲಸಿಕಾ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಹಾಗೂ 8 ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ.. ಲಸಿಕೆದಾರರು ರೈತರುಗಳ ಮನೆ ಬಾಗಿಲಿಗೆ ಭೇಟಿ ನೀಡಿ ಲಸಿಕೆ ಹಾಕಲಿದ್ದಾರೆ.. ರೈತ ಬಾಂಧವರು ಲಸಿಕಾ ಸಿಬ್ಬಂದಿಯೊಂದಿಗೆ ಸಹಕರಿಸಿ ತಪ್ಪದೇ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕೆಂದು ತಿಳಿಸಿದರು..
ಈ ಸಂದರ್ಭದಲ್ಲಿ ಕಾಲುಬಾಯಿ ಬೇನೆ ರೋಗದ ಲಸಿಕಾ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು. ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಉಪಸ್ಥಿತರಿದ್ದರು.