ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ
ಇಂಡಿ: ಬಾಗಲಕೋಟೆ ಜಿಲ್ಲೆಯ ಹುನಗುಂದ ಶಾಸಕ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಕಾಶಪ್ಪನವರ್ ಅಭಿಮಾನಿ ಬಳಗದವರು ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಪಿ. ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಆನಂದ ಕೆಂಬೋಗಿ ಎಂಬುವರು ತಮ್ಮ ವಾಟ್ಸಾಪ್ ಸ್ಟೇಟಸ್ನಲ್ಲಿ, “ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಸಚಿವ ವಿಜಯಾನಂದ ಕಾಶಪ್ಪನವರ್ ಅವರು ಕನ್ನಡ ಓದಲು ಪರದಾಡಿದರು” ಎಂಬರ್ಥದ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಚಿವರಿಗೆ ಹಾಗೂ ಅವರ ಬೆಂಬಲಿಗರಿಗೆ ತೀವ್ರ ಅವಮಾನ ಮಾಡಿದ್ದಾರೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜವಾಬ್ದಾರಿಯುತ ಶಿಕ್ಷಕ ಹುದ್ದೆಯಲ್ಲಿದ್ದುಕೊಂಡು ಜನಪ್ರತಿನಿಧಿಗಳ ತೇಜೋವಧೆ ಮಾಡುವುದು ಖಂಡನೀಯ. ಸಮಾಜಕ್ಕೆ ಮಾದರಿಯಾಗಬೇಕಾದ ಶಿಕ್ಷಕರೇ ಇಂತಹ ಕೃತ್ಯಕ್ಕೆ ಕೈ ಹಾಕಿರುವುದು ಸರಿಯಲ್ಲ. ಆದ್ದರಿಂದ ತಕ್ಷಣವೇ ಸದರಿ ಶಿಕ್ಷಕನ ವಿರುದ್ಧ ಸೂಕ್ತ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿ ಸ್ವೀಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಪಿ. ಅವರು, ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶಿವು ಮಲಕಗೊಂಡ, ಅಭಿಷೇಕ ಓಂಕಾರ, ರಾಹುಲ್ ಕಲ್ಲೂರ, ಅಪ್ಪು ಕ್ಷತ್ರಿ, ಭರತ್ ಕ್ಷತ್ರಿ, ಕಿರಣ ಕ್ಷತ್ರಿ ಸೇರಿದಂತೆ ಇನ್ನಿತರರು ಇದ್ದರು.
ಇಂಡಿ: ವಿಜಯಾನಂದ ಕಾಶಪ್ಪನವರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಕಾಶಪ್ಪನವರ್ ಅಭಿಮಾನಿ ಬಳಗದವರು ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಪಿ. ಅವರಿಗೆ ಗುರುವಾರ ಮನವಿ ಸಲ್ಲಿಸಿದರು.










