ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್ ಝೋನ್: ಆಟೋ-ದ್ವಿಚಕ್ರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ
ನಿಗದಿತ ಸ್ಥಳಗಳಲ್ಲಿ ವ್ಯಾಪಾರ-ವಾಹನಗಳ ನಿಲುಗಡೆ ಮಾಡದವರ ಮೇಲೆ ಕಾನೂನು ರಿತ್ಯ ಕ್ರಮ
ವಿಜಯಪುರ ನ.27 : ವಿಜಯಪುರ ನಗರದ ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್ ಝೋನ್ ಜಾಗದ ವ್ಯವಸ್ಥೆ ಹಾಗೂ ಆಟೋ-ದ್ವಿಚಕ್ರ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಜಾಗ ಗುರುತಿಸಲಾಗಿದ್ದು, ಸೂಚಿಸಿರುವ ಸ್ಥಳಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಕೈಗೊಳ್ಳದೇ ಇರುವುದು ಮತ್ತು ನಿಗದಿತ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡದೇ ಇರುವುದನ್ನು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ರಿತ್ಯ ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ತಿಳಿಸಿದ್ದಾರೆ.
ವಿಜಯಪುರ ನಗರದ ಬೀದಿ ಬದಿ ವ್ಯಾಪಾರಸ್ಥರು ಎಲ್ಲೆಂದರಲ್ಲಿ ವ್ಯಾಪಾರ ಮಾಡುವುದನ್ನು ತಡೆಗಟ್ಟಲು ಮಾನ್ಯ ಉಚ್ಛನ್ಯಾಯಾಲಯದ ಆದೇಶದಂತೆ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಹಾಪೌರರರ ಮಾರ್ಗದರ್ಶನ ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದಲ್ಲಿ ನಗರದ ಸೌಂದರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ನೆಹರು ಮಾರ್ಕೆಟ್ ಹಿಂಭಾಗ, ಎಂ.ಆರ್.ಹೋಟೆಲ್ ಹತ್ತಿರ, ಕೆಎಸ್ಆರ್ಟಿಸಿ ಡಿಪೋ ಪಕ್ಕ, ಅಂಬೇಡ್ಕರ್ ಕ್ರೀಡಾಂಗಣ ಎದುರುಗಡೆ, ಸೈನಿಕಶಾಲೆ ಜಿಮ್ಖಾನಾ ಕ್ಲಬ್ ಹಿಂದೆ, ಹಾಗೂ ಆಹಾರ ಮಾರಾಟಕ್ಕೆ ಇಂಡಿ ರೋಡ ಕ್ರೀಡಾಂಗಣದ ಹತ್ತಿರ, ಜಾಗಗಳನ್ನು ಗುರುತಿಸಿ, ಸದರಿ ಸ್ಥಳಕ್ಕೆ ಬೀದಿ ಬದಿ ವ್ಯಾಪಾರಸ್ಥರರೊಂದಿಗೆ ಮಹಾನಗರ ಪಾಲಿಕೆ ಆಯುಕ್ತರು ಇಂದು ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಸ್ಥರು ಸಂತಸ ವ್ಯಕ್ತಪಡಿಸಿದ್ದಲ್ಲದೇ, ಮುಂದಿನ ದಿನಗಳಲ್ಲಿ ಸದರಿ ಜಾಗಗಳಲ್ಲಿಯೇ ವ್ಯಾಪಾರ ಕೈಗೊಳ್ಳುವುದಾಗಿ ತಿಳಿಸಿದರು.
ಜನದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರು, ಆಟೋ ಮತ್ತು ಇತರೆ ದ್ವಿಚಕ್ರ ವಾಹನಗಳ ಮಾಲೀಕರೊಂದಿಗೆ ಸಭೆ ನಡೆಸಿ, ನಿಗದಿ ಸ್ಥಳಗಳಲ್ಲಿ ಮಾತ್ರ ವಾಹನಗಳನ್ನು ನಿಲುಗಡೆ ಮಾಡಬೇಕು. ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡಬಾರದು ಈ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಚಾರ ಪೊಲಿಸ್ ಅಧಿಕಾರಿಗಳಿಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಸೂಚನೆ ನೀಡಿದರಲ್ಲದೇ, ವೆಂಡಿಂಗ್ ಝೋನ್ಗಳಲ್ಲಿ ಮಾತ್ರ ವ್ಯಾಪಾರ ವಹಿವಾಟು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ವಾಹನ ನಿಲುಗಡೆ ಹಾಗೂ ವ್ಯಾಪಾರ ವಹಿವಾಟು ಮಾಡದವರ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ಸೂಕ್ತ ದಂಡ ವಿಧಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಪೊಲೀಸ್ ಇಲಾಖೆ ಇತರೆ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.