ಜಿ.ಪಂ.ಸಿಇಓ ಅವರಿಂದ ತಾಲೂಕಿನ ವಿವಿಧ ಗ್ರಾ.ಪಂಗಳಿಗೆ ಭೇಟಿ : ಪರಿಶೀಲನೆ
ವಿಜಯಪುರ, ಜೂನ್.21 : ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಜೂನ್ 20 ರಂದು ವಿಜಯಪುರ ತಾಲೂಕಿನ ಜುಮನಾಳ, ಹಿಟ್ಟಿನಹಳ್ಳಿ ಮತ್ತು ಐನಾಪುರ ಗ್ರಾಮ ಪಂಚಾಯಿತಿಗಳಿಗೆ ದಿಢೀರ್ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಹಿಟ್ಟಿನಹಳ್ಳಿ ಹಾಗೂ ಐನಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಪ್ರತಿನಿತ್ಯ ತಪ್ಪದೇ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮಕ್ಕಳ ಆಕರ್ಷಣಿಯ ಬಾಲಾ ಪೇಂಟಿಂಗ್ ಹಾಗೂ ಗ್ರಾಮ ಪಂಚಾಯತಿಯಲ್ಲಿ ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ದುರಸ್ತಿ ಕಾರ್ಯಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಬೇಕು. ಅಂಗನವಾಡಿಗಳಲ್ಲಿ ಕಡ್ಡಾಯವಾಗಿ ಮಕ್ಕಳಿಗೆ ಮೂಲಭೂತ ಸೌಕರ್ಯ ಇರುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸುವುದನ್ನು ಸಂಬಂಧಿಸಿದವರು ನಿಗಾವಹಿಸಬೇಕು. ಅಂಗನವಾಡಿ ಕೇಂದ್ರಗಳ ಒಳಾಂಗಣ ಮತ್ತು ಹೊರಾಂಗಣ ಆವರಣದ ಸ್ವಚ್ಛತೆಗೆ ಕಾಪಾಡಿಕೊಳ್ಳಬೇಕು. ಬಾಲ್ಯದಲ್ಲಿಯೇ ಮಕ್ಕಳಿಗೆ ಶಿಸ್ತು ಮೂಡಲು ಸ್ವಚ್ಛತೆ ಹಾಗೂ ಶುಚಿತ್ವದ ಮಹತ್ವ ಅಗತ್ಯವಾಗಿದ್ದು, ಅಂಗನವಾಡಿಗಳ ಸ್ವಚ್ಛತೆ ಆದ್ಯತೆಯಾಗಿಸಿಕೊಳ್ಳಬೇಕು.
ಹಿಟ್ಟಿನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಗ್ರಂಥಾಲಯದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಿ, ಗ್ರಂಥಾಲಯ ಮಕ್ಕಳ ಸ್ನೇಹಿಯಾದ ವಾತಾವರಣ ಇರುವಂತೆ ಗಮನ ಹರಿಸುವಂತೆ ಸೂಚಿಸಿದರು. ಜುಮನಾಳ, ಹಿಟ್ಟಿನಹಳ್ಳಿ ಮತ್ತು ಐನಾಪುರ ಗ್ರಾಮ ಪಂಚಾಯಿತಿಗಳ ಎಲ್ಲಾ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲನೆ ನಡೆಸಿ, ಸಿಬ್ಬಂದಿ ಕಡ್ಡಾಯವವಾಗಿ ಇ-ಹಾಜರಾತಿ ಸಲ್ಲಿಸಬೇಕು. ಕರ್ತವ್ಯದಲ್ಲಿ ಸಮಯ ಪಾಲನೆ ಮತ್ತು ಶಿಸ್ತನ್ನು ರೂಢಿಸಿಕೊಳ್ಳಬೇಕು. ಗ್ರಾಮ ಪಂಚಾಯತಿಯ ಖಾಲಿ ಇರುವ ಜಾಗೆಯಲ್ಲಿ ವಿವಿಧ ಸಸಿಗಳನ್ನು ನೆಡುವ ಮೂಲಕ ಹಸಿರೀಕರಣಕ್ಕೆ ಒತ್ತು ನೀಡಬೇಕು. ಮಳೆಗಾಲವಾಗಿದ್ದು ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರವಾಗಿ ಗ್ರಾಮಗಳಲ್ಲಿ ನಿಯಮಿತವಾಗಿ ಫಾಗಿಂಗ್ ಮಾಡಬೇಕು. ತ್ಯಾಜ್ಯ ವಸ್ತು ಸಮರ್ಪಕ ನಿರ್ವಹಣೆಗೆ ಪ್ರತಿ ಮನೆಗೆ ಕಸದ ಬುಟ್ಟಿ ವಿತರಣೆ ಮಾಡಿ, ನೈರ್ಮಲ್ಯ ಕಾಪಾಡಿಕೊಳ್ಳುವ ಕುರಿತಾಗಿ ಸಾರ್ವಜನಿಕರಿಗೆ ತಿಳುವಳಿಕೆ ನೀಡಬೇಕು. ಗ್ರಾಮಗಳಲ್ಲಿ ನಿರಂತರ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಐನಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿ ಸಮಯ ಪಾಲನೆ ಮಾಡಬೇಕು. ದಿನದ 24 ಗಂಟೆಯೂ ಸಹ ಸಾರ್ವಜನಿಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಾಗುವಂತೆ ನಿರ್ವಹಣೆ ಮಾಡುವುದರ ಜೊತೆಗೆ, ಆಸ್ಪತ್ರೆಯಲ್ಲಿ ನಿರಂತರ ಸ್ವಚ್ಛತೆ ಕಾಪಾಡಬೇಕು. ಐನಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕದ ಮೂಲಕ ನೀರು ಸರಬರಾಜು ವ್ಯವಸ್ಥೆಯನ್ನು ತುರ್ತಾಗಿ ಪ್ರಾರಂಭಿಸಬೇಕು. ಐನಾಪುರ ಗ್ರಾಮದ ಕೆರೆಯನ್ನು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಬೇಕು ಎಂದು ಸೂಚನೆ ನೀಡಿದರು.
ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದ ಅವರು, ಅವರ ಕುಂದುಕೊರತೆಗಳನ್ನು ಆಲಿಸಿದರು. ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯಡಿ ಹಣ ಜಮೆಯಾಗುತ್ತಿರುವುದನ್ನು ಹಾಗೂ ಈ ಯೋಜನೆಯು ತಮ್ಮ ಜೀವನಕ್ಕೆ ಆಸರೆಯಾಗಿರುವ ಕುರಿತಾಗಿ ಸ್ಥಳದಲ್ಲಿದ್ದ ಫಲಾನುಭವಿಗಳು ತಮ್ಮ ಸಂತಸ ಹಂಚಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸದಸ್ಯರು, ಹಿಟ್ಟಿನಹಳ್ಳಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಓಂಪ್ರಕಾಶ ಬಂಡಿ, ಜುಮನಾಳ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಎಸ್. ಕೆ. ಹೊನಕಟ್ಟಿ, ಎಸ್.ಡಿ.ಎ ಕಸ್ತೂರಿ ಲಮಾಣಿ, ಐನಾಪುರ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ರಾಜೇಶ ಟಿ. ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.