ಯುವ ಅಧಿವೇಶನ’: ಖಾಲಿ ಹುದ್ದೆಗಳ ಭರ್ತಿಗೆ ಸರಕಾರಕ್ಕೆ ಆಗ್ರಹಿಸಿ ತಹಶಿಲ್ದಾರರ ಮನವಿ
ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗೆ ಒತ್ತಾಯಿಸಿ ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ –
ಮುದ್ದೇಬಿಹಾಳ: ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಉಳಿದಿರುವುದು ಯುವಜನತೆಯ ಭವಿಷ್ಯಕ್ಕೆ ಮಾರಕವಾಗಿದೆ. ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಹಾಗೂ ಪಾರದರ್ಶಕತೆ ಕಾಪಾಡಬೇಕು ಎಂದು ಆಗ್ರಹಿಸಿ ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ‘ಜನಸಾಮಾನ್ಯರ ವೇದಿಕೆ’ ವತಿಯಿಂದ ‘ಯುವ ಅಧಿವೇಶನ’ ನಡೆಸಲಾಯಿತು.
ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಉದ್ಯೋಗಾಕಾಂಕ್ಷಿಗಳು ಹಾಗೂ ಚಿಂತಕರು ಅಧಿವೇಶನದಲ್ಲಿ ಪಾಲ್ಗೊಂಡು, ನೇಮಕಾತಿ ವಿಳಂಬ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿನ ಅಸಮರ್ಪಕತೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಶ್ರೀಮತಿ ಕೀರ್ತಿ ಚಾಲಕ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯದ ಮನವಿ ಪತ್ರ ಸಲ್ಲಿಸಿದರು.
ಲಕ್ಷಾಂತರ ಹುದ್ದೆಗಳು ಖಾಲಿ
ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ನ್ಯಾಯವಾದಿ ಪಿ.ಬಿ. ಮಾತಿನ ಹಾಗೂ ಮುಖಂಡರಾದ ಪಿ.ಬಿ. ಗೌಡರ ಮತ್ತು ಯಲ್ಲಪ್ಪ ಹೆಗಡೆ ಮಾತನಾಡಿ, “ರಾಜ್ಯದಲ್ಲಿ 2.84 ಲಕ್ಷ ಹಾಗೂ ಕೇಂದ್ರದಲ್ಲಿ 9.64 ಲಕ್ಷ ಹುದ್ದೆಗಳು ದೀರ್ಘಕಾಲದಿಂದ ಖಾಲಿ ಇರುವುದು ಆತಂಕಕಾರಿ. ಸರ್ಕಾರಗಳು ಉದ್ಯೋಗ ನೀಡುವಲ್ಲಿ ವಿಳಂಬ ಮಾಡುತ್ತಿರುವುದರಿಂದ ಸಾವಿರಾರು ಯುವಕರು ವಯೋಮಿತಿ ಮೀರುವ ಭೀತಿ ಎದುರಿಸುತ್ತಿದ್ದಾರೆ. ಪರೀಕ್ಷಾ ಅಕ್ರಮಗಳು ಅಭ್ಯರ್ಥಿಗಳ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿವೆ” ಎಂದು ಆಕ್ರೋಶ ಹೊರಹಾಕಿದರು.
ಪ್ರಮುಖ ಬೇಡಿಕೆಗಳು
ವಾರ್ಷಿಕ ವೇಳಾಪಟ್ಟಿ: KPSC, KEA, KSP ಸೇರಿದಂತೆ ಎಲ್ಲಾ ನೇಮಕಾತಿ ಪ್ರಾಧಿಕಾರಗಳು ಪ್ರತಿವರ್ಷ ಕಡ್ಡಾಯವಾಗಿ ವಾರ್ಷಿಕ ಪರೀಕ್ಷಾ ಕ್ಯಾಲೆಂಡರ್ ಪ್ರಕಟಿಸಬೇಕು.
ಕನ್ನಡದಲ್ಲಿ ಪರೀಕ್ಷೆ: ಕೇಂದ್ರ ಸರ್ಕಾರದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೂ ನಡೆಸಲು ತಕ್ಷಣ ಕ್ರಮ ಕೈಗೊಳ್ಳಬೇಕು.
ಶುಲ್ಕ ರದ್ದತಿ: ಉದ್ಯೋಗಾಕಾಂಕ್ಷಿಗಳಿಗೆ ಹೊರೆಯಾಗುತ್ತಿರುವ ದುಬಾರಿ ಅರ್ಜಿ ಶುಲ್ಕವನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು.
KPSC ಪುನರ್ರಚನೆ: ರಾಜ್ಯದ ನೇಮಕಾತಿ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರದ ಮಾದರಿಯಲ್ಲಿ KPSCಯನ್ನು ಸಮಗ್ರವಾಗಿ ಪುನರ್ರಚಿಸಬೇಕು.
ಪರೀಕ್ಷಾ ಅಕ್ರಮಗಳಿಗೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕು. ಸರ್ಕಾರ ಯುವಕರ ಈ ನ್ಯಾಯಯುತ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.
ಅಧಿವೇಶನದಲ್ಲಿ ಉದ್ಯೋಗಾಕಾಂಕ್ಷಿಗಳಾದ ಅನೀಲ ವಾಲಿಕಾರ, ಮುತ್ತಣ್ಣ ಒಡ್ಡೋಡಗಿ, ಮುತ್ತು ಕನ್ನೂರ, ಜುಮ್ಮಣ್ಣ ಹೊಕ್ರಾಣಿ, ಬಸವರಾಜ ಹುಲಗಣ್ಣಿ, ಸಿದ್ದು ವಾಲಿಕಾರ, ಸೀತಪ್ಪ ಗಣಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮತ್ತು ಯುವಕರು ಪಾಲ್ಗೊಂಡಿದ್ದರು.